ನೀಟ್ ಮೂಲಕ ಮೆಡಿಕಲ್ ಪ್ರವೇಶಕ್ಕೆ ವಿರೋಧ|ಸಿಇಟಿ ಪರೀಕ್ಷಾ ಪದ್ದತಿ ಜಾರಿಗೆ ಒತ್ತಾಯ|ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ
ಎನ್ಟಿಎ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡಿ, ಈ ಹಿಂದಿನಂತೆ ಮೆಡಿಕಲ್ ಪ್ರವೇಶ ಪರೀಕ್ಷೆಯನ್ನು ಸಿಇಟಿ ಪರೀಕ್ಷಾ ವ್ಯವಸ್ಥೆ ಮೂಲಕ ಜಾರಿಗೆ ತರಬೇಕೆಂಬುದು ಉಪಸ್ಥಿತರಿದ್ದ ಕಾಂಗ್ರೆಸ್ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.

ಶಿವಮೊಗ್ಗ: ನೀಟ್ ಪರೀಕ್ಷಾ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾ ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ನಗರದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸೈನ್ಸ್ ಮೈದಾನದಿಂದ ಗೋಪಿ ವೃತ್ತದವರೆಗೂ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಬಹಿರಂಗ ಸಭೆ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನಕುಮಾರ್ ಮಾತನಾಡಿ, ನೀಟ್ ಅಕ್ರಮಗಳು ನಿರಂತರವಾಗಿ ಸಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ವಿಫಲರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಕ್ಕೆ ನೆರವು ನೀಡಿಲ್ಲ. ಕನಿಷ್ಠ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿಲ್ಲ ಎಂದು ಆರೋಪಿಸಿದರು.
ವಿದ್ಯಾರ್ಥಿಗಳಿಗಾದ ತೊಂದರೆಗೆ ವಿಷಾದ ವ್ಯಕ್ತಪಡಿಸದೇ ಇರುವ ಕೇಂದ್ರ ಸಚಿವ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು.
ಎನ್ಟಿಎ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡಿ, ಈ ಹಿಂದಿನಂತೆ ಮೆಡಿಕಲ್ ಪ್ರವೇಶ ಪರೀಕ್ಷೆಯನ್ನು ಸಿಇಟಿ ಪರೀಕ್ಷಾ ವ್ಯವಸ್ಥೆ ಮೂಲಕ ಜಾರಿಗೆ ತರಬೇಕೆಂಬುದು ಉಪಸ್ಥಿತರಿದ್ದ ಕಾಂಗ್ರೆಸ್ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.
ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಿ ಎಂದು ಪ್ರತಿಭಟನಾನಿರತರು, ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಜವಳಿ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಪಾಲಕೆ ಮಾಜಿ ಸದಸ್ಯ ಹೆಚ್.ಸಿ. ಯೋಗೀಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಶ್ವೇತಾ ಬಂಡಿ, ಶ್ರೀನಿವಾಸ್, ಎನ್.ಎಸ್.ಯು.ಐ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್, ರವಿಕುಮಾರ್, ಕೆ.ದೇವೇಂದ್ರಪ್ಪ, ಶರತ್ ಮರಿಯಪ್ಪ, ಮಧುಸೂದನ್, ಚಿನ್ನಪ್ಪ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







