ಶಿವಮೊಗ್ಗ: ಅಬಕಾರಿ ಇಲಾಖೆ ಭ್ರಷ್ಟಾಚಾರ ವಿರುದ್ದ ಬೀದಿಗಳಿದ ಬಿಜೆಪಿ|ಶಿವಪ್ಪ ನಾಯ್ಕ ವೃತ್ತದಲ್ಲಿ ಪ್ರತಿಭಟನೆ|ಆರ್.ಬಿ.ತಿಮ್ಮಾಪುರ ರಾಜಿನಾಮೆಗೆ ಚೆನ್ನಬಸಪ್ಪ ಒತ್ತಾಯ
ಅಬಕಾರಿ ಸಚಿವರು ರಾಜೀನಾಮೆ ನೀಡುವವರೆಗೂ ಬಿಜೆಪಿ ನಿರಂತರ ಹೋರಾಟ ಮುಂದುವರಿಸಲಿದೆ ಎಂದು ಎಸ್.ಎನ್.ಚೆನ್ನಬಸಪ್ಪ ತಿಳಿಸಿದರು.

ಶಿವಮೊಗ್ಗ: ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರದಂದು ಬೃಹತ್ ಪ್ರತಿಭಟನೆ ನಡೆಯಿತು.
ಶಿವಪ್ಪನಾಯ್ಕ ವೃತ್ತದಲ್ಲಿ ಅಬಕಾರಿ ಖಾತೆ ಸಚಿವ ಆರ್ ಬಿ ತಿಮ್ಮಾಪುರ ಅವರ ಪೋಸ್ಟರ್ ಹಿಡಿದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಭ್ರಷ್ಟ ಸಚಿವ ರಾಜೀನಾಮೆ ನೀಡಬೇಕೆಂದು ಘೋಷಣೆ ಕೂಗಿದರು.

ಶಾಸಕ ಎಸ್.ಎನ್.ಚೆನ್ನಬಸಪ್ಪ ಮಾತನಾಡಿ, ಅಬಕಾರಿ ಇಲಾಖೆಯಲ್ಲಿ ನಡೆದಿರುವ ಸಾವಿರಾರು ಕೋಟಿ ಭ್ರಷ್ಟಾಚಾರದ ದಾಖಲೆಯ ವಿಡಿಯೋಗಳನ್ನು ಸದನದಲ್ಲಿ ಕೊಟ್ಟರೂ ಸರ್ಕಾರ ಪರಿಗಣಿಸದೇ ಭಂಡತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ಸದನದ ಒಳಗೆ ಹೊರಗೆ ಪ್ರತಿಭಟನೆ ನಡೆಸಿದರೂ ಕಾಂಗ್ರೆಸ್ ಸರ್ಕಾರ ಎಲ್ಲ ನೀತಿ ನಿಯಮ ಗಾಳಿಗೆ ತೂರಿ ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸಮಾಡುತ್ತಿದೆ ಎಂದರು.
ಅಬಕಾರಿ ಹಗರಣ ವಿರುದ್ದ ಜನರ ಮುಂದೆ ಬಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಸಾಂಕೇತಿಕ ಪ್ರತಿಭಟನೆ ಆರಂಭಿಸಲಾಗಿದೆ.

ಅಬಕಾರಿ ಸಚಿವರು ರಾಜೀನಾಮೆ ನೀಡುವವರೆಗೂ ಬಿಜೆಪಿ ನಿರಂತರ ಹೋರಾಟ ಮುಂದುವರಿಸಲಿದೆ ಎಂದು ಎಸ್.ಎನ್.ಚೆನ್ನಬಸಪ್ಪ ತಿಳಿಸಿದರು.
ಎಂ.ಎಲ್.ಸಿ ಡಾ.ಧನಂಜಯ ಸರ್ಜಿ ಮಾತನಾಡಿ, ಕಾಂಗ್ರೆಸ್ ಎಂದರೆ ಕರಪ್ಷನ್ , ಕಲೆಕ್ಷನ್ ಕಮಿಷನ್ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಎನ್ ಕೆ ಜಗದೀಶ್, ವಕ್ತಾರ ಎಸ್.ಎಸ್.ಜ್ಯೋತಿ ಪ್ರಕಾಶ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ, ಮಾಲತೇಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಮಹಿಳಾ ಮುಖಂಡರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







