ಹಿಜಾಬ್ ಎಳೆದು ಅವಮಾನ|ಸಿಎಂ ನಿತೀಶ್ಕುಮಾರ್ ಕ್ಷಮೆಯಾಚಿಸಬೇಕು|ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಪ್ರತಿಭಟನೆ
ಭಾರತ ಧರ್ಮನಿರಪೇಕ್ಷ ಮತ್ತು ಪ್ರಜಾಸತ್ತಾತ್ಮಕ ರಾಷ್ಟ್ರವಾಗಿರುವ ಹಿನ್ನೆಲೆಯಲ್ಲಿ, ಮಹಿಳೆಯ ದೇಹ, ವಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಮೇಲೆ ಕೈ ಹಾಕುವ ಯಾವುದೇ ವ್ಯಕ್ತಿ ಕಾನೂನಿನ ಮುಂದೆ ಉತ್ತರದಾಯಿಯಾಗಬೇಕು.

ಶಿವಮೊಗ್ಗ: ಧಾರ್ಮಿಕ ವಸ್ತ್ರ ಹಿಜಾಬ್ ಎಳೆದು ಅವಮಾನಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕ್ಷಮೆಯಾಚಿಸಬೇಕು ಹಾಗೂ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಬುಧವಾರದಂದು ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿಗಳ ಆವರಣದಲ್ಲಿ ಸೇರಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸದಸ್ಯರು ಸಿಎಂ ನಿತೀಶಕುಮಾರ್ ವಿರುದ್ದ ಧಿಕ್ಕಾರ ಎಂದು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕ ವೇದಿಕೆಯಲ್ಲೇ ಮಹಿಳೆಯ ಹಿಜಾಬ್ ಅನ್ನು ಕೈಯಿಂದ ಎಳೆದು ಅವಮಾನಿಸಿರುವುದು ಸಂವಿಧಾನದ ಕಲಂ 14, 15, 21 ಮತ್ತು 25ಗಳಿಗೆ ವಿರುದ್ಧವಾಗಿದ್ದು, ಮಹಿಳೆಯ ಗೌರವ, ಸ್ವಾತಂತ್ರ್ಯ ಹಾಗೂ ಧಾರ್ಮಿಕ ಹಕ್ಕುಗಳ ಮೇಲಿನ ಗಂಭೀರ ದಾಳಿ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸಯ್ಯದ್ ಅಡ್ಡು ಹೇಳಿದರು.

ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯಿಂದ ಇಂತಹ ನಡೆ ನಡೆದಿರುವುದು ಅತ್ಯಂತ ಖಂಡನೀಯ ಎಂದರು.
ಭಾರತ ಧರ್ಮನಿರಪೇಕ್ಷ ಮತ್ತು ಪ್ರಜಾಸತ್ತಾತ್ಮಕ ರಾಷ್ಟ್ರವಾಗಿರುವ ಹಿನ್ನೆಲೆಯಲ್ಲಿ, ಮಹಿಳೆಯ ದೇಹ, ವಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಮೇಲೆ ಕೈ ಹಾಕುವ ಯಾವುದೇ ವ್ಯಕ್ತಿ ಕಾನೂನಿನ ಮುಂದೆ ಉತ್ತರದಾಯಿಯಾಗಬೇಕು.
ರಾಷ್ಟ್ರಪತಿಗಳು ಈ ವಿಚಾರದಲ್ಲಿ ಸ್ವತಂತ್ರ ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಗತ್ಯ ಕಾನೂನು ಕ್ರಮಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿದರು.
ಬಳೀಕ ಪ್ರತಿಭಟನಾಕಾರರು, ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







