ವಿಬಿಜಿ ರಾಮ್ ಜಿ ಹೆಸರಿನಲ್ಲಿ ಇರುವುದು ‘ಸೀತಾರಾಮ’ ನಲ್ಲ! ಮಹಾತ್ಮಾ ಗಾಂಧಿ ಕೊಂದ ನಾಥೂ’ರಾಮ’|ಮನರೇಗಾ ಪುನರ್ಸ್ಥಾಪನೆಗೆ ಜನಾಂದೋಲನ-ಸಿಎಂ ಸಿದ್ದರಾಮಯ್ಯ!
ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು: ಮನರೇಗಾ ಕಾಯ್ದೆ ಪುನರ್ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಹೋರಾಟವು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಂದೋಲನ ರೂಪದಲ್ಲಿ ನಡೆಯಲಿದೆ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ಅಲ್ಲಿನ ರೈತರು ನಡೆಸಿದ ಸುದೀರ್ಘ ಹೋರಾಟ ಇಲ್ಲಿ ಮರುಕಳಿಸಲಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರದಂದು ಕೆಪಿಸಿಸಿ ಹಮ್ಮಿಕೊಂಡಿದ್ದ “ಮನರೇಗಾ ಉಳಿಸಿ ಹೋರಾಟ”ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ, ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮನರೇಗಾ ರದ್ದು ಮಾಡಿರುವುದನ್ನು ಪಕ್ಷವು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು.
ಮಹಾತ್ಮ ಗಾಂಧಿ ಹೆಸರು ಎಂದರೆ ಮನುವಾದಿಗಳಿಗೆ ಅಲರ್ಜಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಮನರೇಗಾ ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿಸಿದ್ದರು.

ನಿರುದ್ಯೋಗ, ಆಹಾರ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದ್ದರು ಎಂದು ಸಿಎಂ ಸ್ಮರಿಸಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳಿಗೆ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು ಎಂದರು.
20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದು ದಶರಥ ರಾಮ, ಸೀತಾ ರಾಮ ಅಥವಾ ಕೌಸಲ್ಯಾ ರಾಮನಲ್ಲ, ಬದಲಿಗೆ ಮಹಾತ್ಮಾ ಗಾಂಧಿ ಕೊಂದ ನಾಥೂರಾಮ. ಗಾಂಧಿಯವರನ್ನು ಮತ್ತೊಮ್ಮೆ ಕೊಲ್ಲುತ್ತಿದ್ದಾರೆ. ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು, ಈಗ ಆ ಹಕ್ಕು ಸಹ ಇಲ್ಲ ಎಂದು ವಿಷಾದವ್ಯಕ್ತಪಡಿಸಿದರು.

ಈಗಿನ ಕಾಯ್ದೆಯಡಿ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು 40% ವೆಚ್ಚವನ್ನು ಭರಿಸಬೇಕಿದೆ. 2,500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ.
ಇದು ರಾಜ್ಯಗಳ ಮೇಲೆ ಹೇರಿಕೆ, ನಾವು ಮನರೇಗಾ ಬಚಾವ್ ಆಂದೋಲನವನ್ನು ರೂಪಿಸಿದ್ದೇವೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವರದಿ: ವಿಜಯೀಂದ್ರ ಹುನಗುಂದ್
ಪ್ರಧಾನ ಸಂಪಾದಕ
ನ್ಯೂಇಂಡಿಯಾ ಕನ್ನಡ
ಬೆಂಗಳೂರು.






